ನವದೆಹಲಿ, ಡಿ.27- ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಉದ್ದೇಶಿತ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ವಿರೋಧಿಸಿ ನವದೆಹಲಿಯ ಶಾಹಿನ್ ಬಾಗ್ನಲ್ಲಿ ಕೊರೆಯುವ ಚಳಿಯನ್ನು ಲೆಕ್ಕಿಸದೆ 200ಕ್ಕೂ ಹೆಚ್ಚು ಮಹಿಳೆಯರು ಅಹೋ ರಾತ್ರಿ ಪ್ರತಿಭಟನೆ ನಡೆಸಿದರು. ಇಂದು ಬೆಳಗ್ಗೆಯಿಂದಲೂ ಮುಸ್ಲಿಂ ಮಹಿಳೆಯರ ದರಣಿ ಮುಂದುವರೆದಿದೆ.
ಡಿ.14ರಿಂದ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ನೊಯ್ಡಾ ಹಾಗೂ ದಕ್ಷಿಣ ದೆಹಲಿ ನಡುವಣ ರಸ್ತೆಯಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು, ಧಾರ್ಮಿಕ ಮುಖಂಡರು ಹಾಗೂ ಸ್ಥಳೀಯರ ಜೊತೆಗೆ ಕಳೆದ ಐದು ದಿನಗಳಿಂದ ಅನೇಕ ಸಭೆಗಳನ್ನು ನಡೆಸುವ ಮೂಲಕ ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಸ್ಲಿಂರ ಮೇಲೆ ತಾರತಮ್ಯ ಮಾಡಲಾಗುತ್ತಿದೆ. ಎನ್ಆರ್ಸಿ ಜಾರಿಗೆ ಬಂದ ಮೇಲೆ ಅಸ್ಸಾಂ ಮತ್ತಿತರ ಕಡೆಗಳಲ್ಲಿ ತೀವ್ರ ಪರಿಣಾಮ ಬೀರಲಿದೆ. ಈ ಕಾಯ್ದೆಯಿಂದ ತೊಂದರೆಯಾಗಬಾರದೆಂಬ ಉದ್ದೇಶದಿಂದ ಇಡೀ ರಾತ್ರಿ ಪ್ರತಿಭಟನೆಗೆ ಕುಳಿತಿರುವುದಾಗಿ ಪ್ರತಿಭಟನಾಕಾರರು ಹೇಳಿದ್ದಾರೆ.
ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಾಪಸ್ ಪಡೆಯುವವರೆಗೂ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ
ಬಲವಂತದಿಂದ ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಯೋಚಿಸಿದ್ದರು ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಆದರೆ ಪ್ರಯಾಣಿಕರಿಗೆ ತೊಂದರೆಯಾಗುತ್ತಿರುವುದರಿಂದ
ಸ್ಥಳೀಯ ಧಾರ್ಮಿಕ ಮುಖಂಡರನ್ನು ಕರೆಸಿ ಪರಿಸ್ಥಿತಿಯನ್ನು ಪ್ರತಿಭಟನಾಕಾರರಿಗೆ ಮನವರಿಕೆ ಮಾಡಿಕೊಡಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.