ದೌರ್ಜನ್ಯ ಪ್ರಕರಣಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

0
247

ರಾಯಚೂರು,ಜ.10- ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಮೇಲೆ ಎಸಗಿದ ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅವರು ಜ.09 ರ ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದೌರ್ಜನ್ಯಕ್ಕೊಳಗಾದ ಕುಟುಂಬಕ್ಕೆ ಸರ್ಕಾರದಿಂದ ನೀಡಲಾಗುವ ಆರ್ಥಿಕ ನೆರವು ಕಲ್ಪಿಸುವಲ್ಲಿ ಸಂಬAಧಿಸಿದ ಅಧಿಕಾರಿಗಳು ವಿಳಂಬಕ್ಕೆ ಆಸ್ಪದ ನೀಡಬಾರದು, ದೌರ್ಜನ್ಯಕ್ಕೊಳಗಾದ ಮಹಿಳೆ ಅಥವಾ ಬಾಲಕಿ ದೂರು ನೀಡಿದ ಕೂಡಲೇ ಎಫ್‌ಐಆರ್ ದಾಖಲಿಸಿ ಅಗತ್ಯ ಕ್ರಮಕೈಗೊಳ್ಳಬೇಕೆಂದು ಅವರು ಸೂಚನೆ ನೀಡಿದರು.
ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರಿಗೆ ಸ್ಮಶಾನಕ್ಕಾಗಿ ಸ್ಥಳವನ್ನು ಗುರುತಿಸಬೇಕು, ಸರ್ಕಾರಿ ಜಮೀನು ಲಭ್ಯವಿದಿದ್ದ ಪಕ್ಷದಲ್ಲಿ ಖಾಸಗಿಯವರಿಂದ ಖರೀದಿಸಿ ಕೊಡಬೇಕು, ಈ ನಿಟ್ಟಿನಲ್ಲಿ ಜಿಲ್ಲೆಯ ಆಯಾ ತಾಲೂಕುಗಳ ವ್ಯಾಪ್ತಿಯಲ್ಲಿ ಈ ಜನಾಂಗದವರಿಗೆ ರುದ್ರಭೂಮಿ ಇರುವ ಬಗ್ಗೆ ಅಥವಾ ಇಲ್ಲದಿರುವ ಬಗ್ಗೆ ಸಂಬAಧಿದ ಅಧಿಕಾರಿಗಳು ವರದಿ ನೀಡುವಂತೆ ಅವರು ತಾಕೀತು ಮಾಡಿದರು.
ರಾಯಚೂರು ತಾಲೂಕಿನ ಬೋಳಮಾನದೊಡ್ಡಿ ರಸ್ತೆ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯವರ ರುದ್ರಭೂಮಿಗೆ ಅಗತ್ಯ ಸೌಲಭ್ಯ ಒದಗಿಸಿಕೊಡಬೇಕು, ಜಿಲ್ಲೆಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಶೇ. 40ಕ್ಕೂ ಮೇಲ್ಪಟ್ಟ ಗ್ರಾಮಗಳ ಮಾಹಿತಿಯನ್ನು ತಾಲೂಕುವಾರು ಒದಗಿಸುವಂತೆ ಅವರು ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.
2019ರಲ್ಲಿ 65 ಪ್ರಕರಣಗಳು ವರದಿಯಾಗಿದ್ದು, ಆ ಪೈಕಿ 56 ಪ್ರಕರಣಗಳಲ್ಲಿ ಪರಿಹಾರ ನೀಡಲಾಗಿದೆ, 9 ಪ್ರಕರಣಗಳು ಬಾಕಿ ಇವೆ  ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸುಬ್ರಮಣ್ಯ ಅವರು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಸಹಾಯಕ ಆಯುಕ್ತ ಸಂತೋಷ್, ತಹಸೀಲ್ದಾರ್ ಹಂಪಣ್ಣ, ಡಿಒಎಸ್‌ಪಿ ಶೀಲವಂತ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ರಾಜೇಂದ್ರ ಜಲ್ದಾರ್, ಮಂಗಳ ಹೆಗಡೆ ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here