ರಾಯಚೂರು,ನ.11- ಸಾಮಾನ್ಯ ಸೇವಾ ಕೇಂದ್ರಗಳು ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳನ್ನು ಮುಟ್ಟಿಸುವ ಉದ್ದೇಶದಿಂದ ಸ್ಥಾಪಿಸಲಾಗಿದ್ದು, ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕರಿ ದುರಗೇಶ ಅವರು ಕರೆ ನೀಡಿದರು.
ಅವರು ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸಾಮಾನ್ಯ ಸೇವೆ ಕೇಂದ್ರ (ಸಿಎಸ್ಸಿ) ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು ಸೇವಾ ಕೇಂದ್ರಗಳ ಕೆಲಸವಾಗಿದೆ. ಕೃಷಿ ಇಲಾಖೆ ಮತ್ತು ಚುನಾವಣೆ ಸಂದರ್ಭದಲ್ಲಿ ನಿಮ್ಮ ಸಹಕಾರ ಅಗತ್ಯವಾಗಿರುತ್ತದೆ. ಫಲಾನುಭವಿಗಳಿಂದ ಅಗತ್ಯ ದಾಖಲೆ ಪಡೆದು ತಂತ್ರಾಂಶದಲ್ಲಿ ಅಪಲೋಡ್ ಮಾಡಬೇಕಾಗಿದೆ. ಉತ್ತಮ ಸೇವೆ ಕಲ್ಪಿಸಬೇಕು. ಪ್ರತಿ ದಿನದ ಮಾಹಿತಿಯನ್ನು ಜಿಲ್ಲಾ ಆಡಳಿತಕ್ಕೆ ಸಲ್ಲಿಸಬೇಕು ಎಂದರು..
ಜಿಲ್ಲೆಯಲ್ಲಿ ೬೦೦ ಸೇವಾ ಕೇಂದ್ರಗಳ ಪೈಕಿ ೪೦೦ ಮಾತ್ರವೇ ಕಾರ್ಯ ನಿರ್ವಹಿಸುತ್ತವೆ. ಕ್ರಿಯಾತ್ಮಕವಾಗಿ ಕೆಲಸ ಮಾಡಬೇಕಾಗಿದೆ. ಸೇವಾ ಕೇಂದ್ರಗಳ ಹೆಸರಿನಲ್ಲಿ ಅವ್ಯವಹಾರ ನಡೆಸುವವರು ವಿರುದ್ದ ಪ್ರಕರಣ ದಾಖಲಿಸಬೇಕಾಗುತ್ತದೆ. ಸೇವಾ ಕೇಂದ್ರಗಳ ಲಾಗಿನ್ ಮತ್ತು ಪಾಸ್ ವಾರ್ಡ್ ದುರುಪಯೋಗವಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು.
ರಾಯಚೂರು ಜಿಲ್ಲೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಆಯ್ಕೆಯಾಗಿರುವುದರಿಂದ ಕೇಂದ್ರ ಸರ್ಕಾರ ಜಿಲ್ಲೆಗೆ ಒದಗಿಸುವ ಸೌಲಭ್ಯಗಳನ್ನು ಫಲಾನುಭವಿಗಳಿಗೆ ತಲುಪಿಸಬೇಕಾಗಿರುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ನಿದರ್ಶನದಂತೆ ಕೆಲಸ ಮಾಡಬೇಕಾಗಿದೆ ಎಂದರು..
ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಸರ್ಕಾರ ನಿಗದಿಪಡಿಸಿದ ದರದಲ್ಲಿ ಫಲಾನುಭವಿಗಳಿಂದ ಶುಲ್ಕ ಪಡೆಯಬೇಕು, ಹೆಚ್ಚಿನ ಶುಲ್ಕ ವಸೂಲಿ ಮಾಡಿರುವುದು ಕಂಡುಬಂದಲ್ಲಿ ಅಂತಹ ಸೇವಾ ಕೇಂದ್ರದ ವಿರುದ್ದ ಕ್ರಮ ಜರುಗಿಸಬೇಕಾಗುತ್ತದೆ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ತಹಶೀಲ್ದಾರ ಸಂತೋಷ ರಾಣಿ, ಸಾಮಾನ್ಯ ಸೇವೆ ಕೆಂದ್ರದ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ ಕಟ್ಟಿಮನಿ ಇತರರು ಉಪಸ್ಥಿತರಿದ್ದರು.