ಪುಣೆ, ಡಿ.21- ದೇಶದ ಪ್ರಗತಿಗೆ ಅಡ್ಡಿಯಾಗಿ ಕಾಡುತ್ತಿರುವ ಗಂಭೀರ ಮತ್ತು ಜ್ವಲಂತ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಕೇಂದ್ರ ಸರ್ಕಾರ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದೆ ಎಂದು ಎನ್ಸಿಪಿ ನಾಯಕ ಶರದ್ ಪವಾರ್ ವಾಗ್ದಾಳಿ ನಡೆಸಿದ್ದಾರೆ. ಪುಣೆಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ತೀವ್ರ ಆರ್ಥಿಕ ಸಮಸ್ಯೆ, ರೈತರ ದುರಾವಸ್ಥೆ, ನಿರುದ್ಯೋಗ ಸೇರಿದಂತೆ ಅನೇಕ ಸಮಸ್ಯೆಗಳು ತಾಂಡವವಾಡುತ್ತಿವೆ.
ಈ ಕಾಯ್ದೆಯಿಂದ ದೇಶದಲ್ಲಿ ಕೋಮು ಸಾಮರಸ್ಯ ಕದಡಿದ್ದು ಸಮಾಜದಲ್ಲಿ ಆತಂಕಕಾರಿ ವಾತಾವರಣ ನಿರ್ಮಾಣವಾಗಿದೆ. ಹಲವೆಡೆ ಭುಗಿಲೆದ್ದ ಪ್ರತಿಭಟನೆಯಿಂದಾಗಿ ಸಾವು-ನೋವು ಸಂಭವಿಸಿದೆ. ಇದಕ್ಕೆಲ್ಲ ಎನ್ಡಿಎ ಸರ್ಕಾರವೇ ಕಾರಣ ಎಂದು ಆರೋಪಿಸಿದರು.
ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾ ದೇಶದ ಮುಸ್ಲಿಮೇತರರಿಗೆ ಮಾತ್ರ ಪೌರತ್ವ ನೀಡಲಾಗುತ್ತಿದೆ. ಆದರೆ ದಶಕಗಳ ಕಾಲ ಶ್ರೀಲಂಕಾದ ಅಂತರ್ಯುದ್ಧದಲ್ಲಿ ನಲುಗಿರುವ ಭಾರತೀಯ ಮೂಲದ ತಮಿಳರಿಗೆ ಏಕೆ ನಮ್ಮ ಪೌರತ್ವ ನೀಡುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.