ಬೀದರ್:ಅ.24: ನಗರದ ಶಾಹೀನ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ ಅಮೋಘವಾದದ್ದಾಗಿದೆ. ಈ ಸಂಸ್ಥೆಯ ವಿದ್ಯಾರ್ಥಿಗಳು ಎನ್ಇಇಟಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಸಂಸ್ಥೆ ಮಾತ್ರವಲ್ಲ ಬೀದರ್ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಶಾಹೀನ್ ಶಿಕ್ಷಣ ಸಂಸ್ಥೆಯಲ್ಲೇ ವ್ಯಾಸಾಂಗ ಮಾಡಿದ ವಿದ್ಯಾರ್ಥಿ ಕಾರ್ತಿಕ್ ರೆಡ್ಡಿ ಎನ್ಇಇಟಿ ಪರೀಕ್ಷೆಯಲ್ಲಿ ದೇಶಕ್ಕೆ 9ನೇ ರ್ಯಾಂಕ್, ರಾಜ್ಯಕ್ಕೆ 1ನೇ ರ್ಯಾಂಕ್ ಪಡೆದಿದ್ದು, ಇನ್ನೊಬ್ಬ ವಿದ್ಯಾರ್ಥಿ ಎಮ್.ಡಿ ಅರ್ಭಜ್ ಅಮ್ಮೀದ್ ದೇಶಕ್ಕೆ 85ನೇ ರ್ಯಾಂಕ್, ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದುಕೊಂಡಿದ್ದರಿಂದ ಶಾಸಕ ಬಂಡೆಪ್ಪ ಖಾಶೆಂಪುರ್ ಅವರು ಶಾಹೀನ್ ಸಂಸ್ಥೆಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸಿ ಮಾತನಾಡಿದರು.
ಬೀದರ್ ಎಂದರೇ ಕರ್ನಾಟಕದ ಕಿರಿಟ ಇದ್ದಂತೆ, ಎನ್ಇಇಟಿಯಲ್ಲಿ ಕರ್ನಾಟಕಕ್ಕೆ ಬೀದರ್ ಟಾಪರ್ ಆಗಿದೆ. ಉತ್ತಮ ಸಾಧನೆ ಮಾಡುವ ಮೂಲಕ ಶಾಹೀನ್ ಶಿಕ್ಷಣ ಸಂಸ್ಥೆ ಬೀದರ್ ಜಿಲ್ಲೆಗೆ ಮಾದರಿಯಾಗಿದೆ. ಈ ಸಂಸ್ಥೆಯಲ್ಲಿ ವ್ಯಾಸಾಂಗ ಮಾಡಿದ ವಿದ್ಯಾರ್ಥಿಗಳಾದ ಕಾರ್ತಿಕ್ ರೆಡ್ಡಿ, ಎಮ್.ಡಿ ಅರ್ಭಜ್ ಅಮ್ಮೀದ್ ರವರ ಸಾಧನೆ ವಿದ್ಯಾರ್ಥಿಗಳಿಗೆ ಮಾದರಿಯಾಗಲಿ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಅಬ್ದುಲ್ ಖದೀರ್ ಸೇರಿದಂತೆ ಸಂಸ್ಥೆಯ ಸಿಬ್ಬಂದಿಗಳು ಇದ್ದರು.